
ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ ಪ್ರಕರಣ : ಪತಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
ಶಿವಮೊಗ್ಗ, ಮಾ. 20: ಮಹಿಳೆಯೋರ್ವರು ತನ್ನಿಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಭದ್ರಾವತಿಯ 4 ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಭದ್ರಾವತಿ ಪಟ್ಟಣದ ನೆಹರು ನಗರದ ನಿವಾಸಿ ವೆಂಕಟೇಶ್ ಯಾನೆ ಬುಡ್ಡ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಮಾ. 18 ರಂದು ನ್ಯಾಯಾಧೀಶರಾದ ಆರ್.ವೈ.ಶಶಿಧರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಶಿಕ್ಷೆಗೊಳಗಾದ ವೆಂಕಟೇಶ್ ಯಾನೆ ಬುಡ್ಡ ನೀಡುತ್ತಿದ್ದ ಹಿಂಸೆಯಿಂದ ಬೇಸತ್ತು, 30 ವರ್ಷ ವಯೋಮಾನದ ಆತನ ಪತ್ನಿಯು 8 ಹಾಗೂ 5 ವರ್ಷದ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ, 27-5-2020 ರಂದು ಭದ್ರಾ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.
ಈ ಸಂಬಂಧ ಮೃತೆಯ ಸಹೋದರ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ವೆಂಕಟೇಶ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
