ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ – ಎನ್.ಎಸ್.ಯು.ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಮಾ. 28: ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಿದ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ, ಎನ್.ಎಸ್.ಯು.ಐ ಸಂಘಟನೆ ಕಾರ್ಯಕರ್ತರು ಮಂಗಳವಾರ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲು ತಡೆಗೆ ವಿಫಲ ಯತ್ನಿಸಿದ ಘಟನೆ ನಡೆಯಿತು.

ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ರೈಲ್ವೆ ನಿಲ್ದಾಣದೊಳಗೆ ಪ್ರವೇಶಿಸಲು ಯತ್ನಿಸಿದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು. ನಂತರ ಬಿಡುಗಡೆಗೊಳಿಸಿದರು.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ. ಆದೇಶದ ಪ್ರತಿ ಕೈ ಸೇರುವ ಮುನ್ನವೇ ಅವರನ್ನು ಸಂಸತ್ ಸದಸ್ಯತ್ವದಿಂದ ವಜಾಗೊಳಿಸಿರುವುದು ಖಂಡನಾರ್ಹವಾದುದಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಕೂಡಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹಗೊಳಿಸಿರುವ ಆದೇಶ ವಾಪಾಸ್ ಪಡೆಯಬೇಕು. ಇಲ್ಲದಿದ್ದರೆ ಸಂಘಟನೆವತಿಯಿಂದ ಮುಂದಿನ ದಿನಗಳಂದು ಉಗ್ರ ಸ್ವರೂಪದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Previous post ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು?
#ಬಣಜಾರಸಮುದಾಯದಪ್ರತಿಭಟನೆ, Next post ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ