
shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಡಿಸಿ ಗುರುದತ್ತ ಹೆಗಡೆ ಮಹತ್ವದ ಕ್ರಮ!
ವರದಿ : ಬಿ. ರೇಣುಕೇಶ್
ಶಿವಮೊಗ್ಗ (shivamogga), ಜು. 1: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಕುರಿತಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಬಗ್ಗೆ ಸದ್ಯ ಸಿದ್ದಪಡಿಸಲಾಗಿರುವ ವರದಿಯನ್ನು, ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪಾಲಿಕೆ ಆಡಳಿತಕ್ಕೆ ಸೂಚಿಸಿದ್ದಾರೆ!
ಪ್ರಸ್ತುತ ಪಾಲಿಕೆ ಆಡಳಿತ ಸಿದ್ದಪಡಿಸಿರುವ ವರದಿಯಲ್ಲಿ, ನಗರಕ್ಕೆ ಹೊಂದಿಕೊಂಡಂತಿರುವ ಹಲವು ವಸತಿ ಬಡಾವಣೆಗಳ ಹೆಸರಿಲ್ಲ. ತಮ್ಮ ವ್ಯಾಪ್ತಿಯ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡುವಂತೆ ಸದರಿ ಬಡಾವಣೆಗಳ ನಿವಾಸಿಗಳು ಒತ್ತಾಯಿಸಲಾರಂಭಿಸಿದ್ದಾರೆ. ಈ ಸಂಬಂಧ ಆಡಳಿತಕ್ಕೆ ಮನವಿ ಕೂಡ ಅರ್ಪಿಸಲಾರಂಭಿಸಿದ್ದಾರೆ.
ನಾಗರೀಕರ ಬೇಡಿಕೆಗಳ ಹಿನ್ನೆಲೆಯಲ್ಲಿ, ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯ ವರದಿ ಹಾಗೂ ನಾಗರೀಕರ ಬೇಡಿಕೆಗಳ ಅವಲೋಕಿಸಿ, ಮತ್ತೊಮ್ಮೆ ವರದಿ ಸಲ್ಲಿಸುವಂತೆ ಪಾಲಿಕೆ ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ಧಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತಂತೆ ಜು. 1 ರಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಡಿಸಿ ಗುರುದತ್ತ ಹೆಗಡೆ ಅವರು ಮಾತನಾಡಿ, ‘ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಕುರಿತಂತೆ ಮೊದಲ ಹಂತದ ಸಭೆ ನಡೆಸಲಾಗಿದೆ. ಗ್ರಾಮ ಪಂಚಾಯ್ತಿ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಹಾಗೆಯೇ ವ್ಯಾಪ್ತಿ ಪರಿಷ್ಕರಣೆ ಕುರಿತಂತೆ ಸಿದ್ದಪಡಿಸಿರುವ ವರದಿಯನ್ನು, ಮತ್ತೊಮ್ಮೆ ಪರಿಷ್ಕರಿಸಿ ಸಲ್ಲಿಸುವಂತೆ ಪಾಲಿಕೆ ಆಡಳಿತಕ್ಕೆ ಸೂಚಿಸಲಾಗಿದೆ. ಪ್ರದೇಶಗಳ ಸೇರ್ಪಡೆ ಕುರಿತಂತೆ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ದಶಕಗಳ ನಂತರ : ಸರಿಸುಮಾರು 30 ವರ್ಷಗಳ ನಂತರ, ಶಿವಮೊಗ್ಗ ನಗರಾಡಳಿತ ವ್ಯಾಪ್ತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಸ್ತುತ ಪಾಲಿಕೆ ಆಡಳಿತ ಸಿದ್ದಪಡಿಸಿರುವ ವರದಿಯಲ್ಲಿ, 9 ಗ್ರಾಮ ಪಂಚಾಯ್ತಿಯ 19 ಹಳ್ಳಿಗಳನ್ನು ಪಾಲಿಕೆ ವ್ಯಾಪ್ತಿ ಸೇರ್ಪಡೆ ಮಾಡಿಕೊಳ್ಳುವ ಚಿಂತನೆ ನಡೆಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೇ ತಿಂಗಳಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದರು.
ಈ ನಡುವೆ ನಗರಕ್ಕೆ ಹೊಂದಿಕೊಂಡಂತಿರುವ ಕೆಲ ವಸತಿ ಬಡಾವಣೆಗಳನ್ನು, ಪಾಲಿಕೆ ಸಿದ್ದಪಡಿಸಿದ್ದ ವರದಿಯಲ್ಲಿ ಕೈಬಿಡಲಾಗಿತ್ತು. ಇದು ಬಡಾವಣೆಗಳ ನಾಗರೀಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಗ್ರಾಮ ಪಂಚಾಯ್ತಿ ಆಡಳಿತಗಳಿಂದ ಸಮರ್ಪಕ ನಾಗರೀಕ ಸೌಲಭ್ಯ ಸಿಗದೆ ಸಂಕಷ್ಟ ಅನುಭವಿಸುತ್ತಿರುವ ನಾಗರೀಕರು, ತಮ್ಮ ಬಡಾವಣೆಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಲಾರಂಭಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪಾಲಿಕೆ ವ್ಯಾಪ್ತಿ ಸೇರ್ಪಡೆಗೆ ಪ್ರಸ್ತುತ ಸಿದ್ದಪಡಿಸಿರುವ ಪಟ್ಟಿಯನ್ನು ಮತ್ತೊಮ್ಮೆ ಪರಿಷ್ಕರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಪಾಲಿಕೆ ಆಡಳಿತಕ್ಕೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಜನಪ್ರತಿನಿಧಿಗಳ ಮೌನ? : ಸರಿಸುಮಾರು 3 ದಶಕಗಳ ನಂತರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ನಡೆಯುತ್ತಿದೆ. ಆದರೆ ಈ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳು ಯಾವುದೇ ಚಕಾರ ಎತ್ತದೆ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇದು ನಾಗರೀಕ ವಲಯದಲ್ಲಿ ಸಾಕಷ್ಟು ಚರ್ಚೆಗೆಡೆ ಮಾಡಿಕೊಟ್ಟಿದೆ.
ಒಟ್ಟಾರೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ, ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ವೈಜ್ಞಾನಿಕ ರೀತಿಯಲ್ಲಿ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದ್ಯ ಗಮನಹರಿಸಬೇಕಾಗಿದೆ ಎಂಬುವುದು ನಾಗರೀಕರ ಆಗ್ರಹವಾಗಿದೆ.
Shivamogga, Jul. 1: There has been a significant development regarding the revision of the Shivamogga Municipal Corporation’s jurisdiction. Deputy Commissioner Gurudatta Hegde has instructed the corporation administration to re-examine and submit the report currently being prepared regarding the revision of the corporation’s jurisdiction!