
ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು
ಶಿವಮೊಗ್ಗ : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 ರಂದು ಹೊರಡಿಸಿದೆ. ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪಿಓಪಿ ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ.ಪಿ.ಸಿ. ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರ ಸಭೆ/ಪುರಸಭೆ ವತಿಯಿಂದ ನಿಗದಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸುವುದು
ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಮಹಾನಗರ ಪಾಲಿಕೆ/ನಗರ ಸಭೆ/ಪುರಸಭೆ/ಪಂಚಾಯತ್ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.
ಸಾರ್ವಜನಿಕವಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಿದೆ. ಹಾಗೂ ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಣೇಶಮೂರ್ತಿಗಳ ವಿಸರ್ಜನೆಗೆ ಸಂಚಾರಿ ಟ್ಯಾಂಕ್ ವ್ಯವಸ್ಥೆ
ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ಶಿವಮೊಗ್ಗ ನಗರದ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆ ಮಾಡಿದೆ.
ಹೊಸಮನೆ 5 ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ – ಸಂಜೆ 6.00 ರಿಂದ 6.30 ರವರೆಗೆ, ಗೋಪಾಳ ಬಸ್ಸ್ಟ್ಯಾಂಡ್ – ಸಂಜೆ 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ, ಇನ್ಕಂಟ್ಯಾಕ್ಸ್ ಕಚೇರಿ ಹತ್ತಿರ – 7.30 ರಿಂದ 8.00ರವರೆಗೆ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ವಿನೋಬನಗರ – 8.15 ರಿಂದ 8.45ರವರೆಗೆ,
ಕಾಶೀಪುರ ಬಸ್ಸ್ಟ್ಯಾಂಡ್ – 9.00 ರಿಂದ 9.15 ರವರೆಗೆ, ಚೌಡೇಶ್ವರಿ ದೇವಸ್ಥಾನದ ಹತ್ತಿರ, ಲಾಲ್ ಬಹದ್ದೂರ್ ಶಾಸ್ತ್ರಿನಗರ – 9.30 ರಿಂದ 10.00 ರವರೆಗೆ ಸಂಚಾರಿ ವಾಹನದ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರು ಈ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳುವಂತೆ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಶೋಕ್ ಕುಮಾರ್ ಮೊ.ಸಂ.: 9845411908 ನ್ನು ಸಂಪರ್ಕಿಸಬಹುದಾಗಿದೆ.