
ಕರ್ನಾಟಕ ಬಂದ್ ಗೆ ರೈತ ಸಂಘದ ಬೆಂಬಲ ಘೋಷಣೆ!
ಶಿವಮೊಗ್ಗ, ಸೆ. 28: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸೆ. 29 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.
ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾವೇರಿ ವಿವಾದವನ್ನು ಸಮರ್ಥವಾಗಿ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾವೇರಿ ಪ್ರಾಧಿಕಾರ, ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ನೀರು ಹರಿಸಿ ಪ್ರಮಾದ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಜಲ ನೀತಿ, ಮಾರ್ಗಸೂಚಿ ಹಾಗೂ ಸಂಕಷ್ಟ ಸೂತ್ರವಿಲ್ಲದೆ ಕಾವೇರಿ ನದಿ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಯಾವುದೇ ತೀರ್ಪುಗಳು ಊರ್ಜಿತವಾಗುವುದಿಲ್ಲ. ರಾಜ್ಯ ಸರ್ಕಾರ ಸಮರ್ಥ ವಕೀಲರ ಮೂಲಕ ನ್ಯಾಯಾಲಯದಲ್ಲಿ ವಾದ ಮಂಡಿಸುವ ಕಾರ್ಯ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.
ಕಾವೇರಿ ನದಿ ನೀರು ಹರಿಸಿದರೆ ಬೇಸಿಗೆ ವೇಳೆ ಕಾವೇರಿ ಕೊಳ್ಳದಲ್ಲಿ ಬೆಳೆಗಳಿಗೆ ನೀರು ಹರಿಸುವುದಿರಲಿ, ಕುಡಿಯುವ ನೀರಿಗೂ ತತ್ವಾರ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಬಂದ್ ಸಂಘಟನೆ ಬೆಂಬಲ ವ್ಯಕ್ತಪಡಿಸಲಿದೆ. ರಾಜ್ಯಾದ್ಯಂತ ರಸ್ತೆ ತಡೆ, ಪ್ರತಿಭಟನೆ, ಜಿಲ್ಲಾಧಿಕಾರಿ, ತಾಲೂಕು ಕಚೇರಿಗಳಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ನಡೆಸಲಿದೆ. ಚಳುವಳಿಯಲ್ಲಿ ಭಾಗವಹಿಸಲಿದೆ ಎಂದು ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.