
ಡಿಎಸ್ಎಸ್ ನಿಂದ ಅನಿರ್ದಿಷ್ಟಾವದಿ ಅಹೋರಾತ್ರಿ ಧರಣಿ ಸತ್ಯಾಗ್ರಹ
ಶಿವಮೊಗ್ಗ, ಫೆ. 12: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯು ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು, ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ. ಸಂಘಟನೆಯ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ ನೇತೃತ್ವದಲ್ಲಿ ಸತ್ಯಾಗ್ರಹ
ನಡೆಸಲಾಗುತ್ತಿದೆ. ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ
ತನಿಖೆ ನಡೆಸಬೇಕು. ಯೋಜನೆಯಡಿ ಸಮರ್ಪಕವಾಗಿ ಅನುದಾನ ಬಳಕೆ ಮಾಡದೆ, ಬೇರೆ ಯೋಜನೆಗಳಿಗೆ
ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ
ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಹಲವೆಡೆ ಎಸ್ಸಿ-ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ
ಮಾಡದೆ, ಮೇಲ್ವರ್ಗದವರು ವಾಸಿಸುತ್ತಿರುವ ಸ್ಥಳಗಳಲ್ಲಿ ರಸ್ತೆ ನಿರ್ಮಿಸಲಾಗಿದೆ.
ತುಂಗಾ ಮೇಲ್ದಂಡೆ ಯೋಜನೆಯವರು ಕಾಮಗಾರಿ ಅನುಷ್ಠಾನದಲ್ಲಿ ಲೋಪ ಎಸಗಿದ್ದಾರೆ.
ಬಸವನಗಂಗೂರು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮಕೈಗೊಂಡಿಲ್ಲ.
ಶಿವಮೊಗ್ಗ ನಗರದಲ್ಲಿ ಅಂಬೇಡ್ಕರ್ ಭವನ ದುರಸ್ತಿ ಕಾರ್ಯ ವಿಳಂಬವಾಗಿ ನಡೆಸಲಾಗುತ್ತಿದೆ
ಎಂಬುವುದು ಸೇರಿದಂತೆ ದಲಿತ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ
ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ
ಶಿವಕುಮಾರ್ ಸೇರಿದಂತೆ ಮೊದಲಾದವರಿದ್ದರು.