ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ!

ಶಿವಮೊಗ್ಗ, ಫೆ. 20: ಶಿವಮೊಗ್ಗ ತಾಲೂಕಿನ ಹೊಳೆಹಟ್ಟಿ ಹಾಗೂ ಹೊಳಲೂರು ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ, ಸೋಮವಾರ  ರೈತರು ಹೊಳಲೂರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ತೋಟ, ಗದ್ದೆಗಳಲ್ಲಿ ಬೆಳೆದ ಬೆಳೆಗಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಬಿಸಿಲ ಪ್ರಮಾಣ ಹೆಚ್ಚಾಗಿರುವುದರಿಂದ ಬೆಳೆಗಳು ಒಣಗುತ್ತಿವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಹಗಲು 7 ಗಂಟೆ ಕಾಲ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುವಲ್ಲಿ ಮೆಸ್ಕಾಂ ವಿಫಲವಾಗಿದೆ. ಸರ್ಕಾರದ ಆದೇಶದ ಹೊರತಾಗಿಯೂ ಸಮರ್ಪಕವ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇದರಿಂದ ಕಷ್ಟಪಟ್ಟು ಬೆಳೆದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದಂತಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡಿದ್ದಾರೆ.
ತಕ್ಷಣವೇ ಮೆಸ್ಕಾಂ ಸಂಸ್ಥೆ ಹೊಳೆಹಟ್ಟಿ ಸುತ್ತಮುತ್ತಲಿನ ಗ್ರಾಮಗಳಿಗೆ, ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಉಗ್ರ ಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ರಾಘವೇಂದ್ರ, ಗುರುಶಾಂತ, ತಾಲೂಕು ಅಧ್ಯಕ್ಷರಾದ ಸಿ.ಚಂದ್ರಪ್ಪ, ತಾಲೂಕು ಕಾರ್ಯದರ್ಶಿ ಶಿವಮೂರ್ತಿ ಸೇರಿದಂತೆ ಮೊದಲಾದವರಿದ್ದರು.

Previous post ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ!
Next post ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ