ಶಿವಮೊಗ್ಗ, ಮಾ. 28: ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಮಂಗಳವಾರ ಬೆಳಿಗ್ಗೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮಸ್ಥರು ಶಿವಮೊಗ್ಗ – ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆಯಿಂದಲೇ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ಆರಂಭಿಸಿದರು. ಹೆದ್ಧಾರಿ ಮಧ್ಯೆ ಟೈರ್ ಗಳಿಗೆ ಬೆಂಕಿ ಹಚ್ಚಿ ಧರಣಿ ನಡೆಸಿದರು. ಒಳ ಮೀಸಲಾತಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಿಢೀರ್ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಇಕ್ಕೆಲಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರ ಮನವೊಲಿಕೆಗೆ ಹರಸಾಹಸ ನಡೆಸಿದರು. ಸುಮಾರು 3 ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ನಂತರ ಪ್ರತಿಭಟನೆ ಕೈಬಿಟ್ಟರು.

