5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನದ ಆಭರಣ ಪತ್ತೆ…!!
ಶಿವಮೊಗ್ಗ, ಎ. 11: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.
ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಬಂಗಾರದ ಆಭರಣ ಕೊಂಡೊಯ್ಯುತ್ತಿರುವ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಇನ್ಸ್’ಪೆಕ್ಟರ್ ಶಿವಪ್ರಸಾದ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ಸದರಿ ವ್ಯಕ್ತಿಯನ್ನು ಹಿಂಬಾಲಿಸಿ ವಶಕ್ಕೆ ಪಡೆದುಕೊಂಡಿತ್ತು.
ಈ ವೇಳೆ ಚಿನ್ನಾಭರಣಗಳಿರುವುದು ಪತ್ತೆಯಾಗಿತ್ತು. ಜೊತೆಗೆ ಸದರಿ ವ್ಯಕ್ತಿ ಚಿನ್ನಾಭರಣ ಕೊಂಡೊಯ್ಯುತ್ತಿದ್ದ ಅಂಗಡಿಯಲ್ಲಿಯೂ ಪರಿಶೀಲನೆ ನಡೆಸಿದ್ದರು. ಸೂಕ್ತ ದಾಖಲೆಯಿಲ್ಲದ ಚಿನ್ನಾಭರಣ ವಶಕ್ಕೆ ಪಡೆದುಕೊಂಡು, ತನಿಖೆ ಮುಂದುವರಿಸಿದ್ದಾರೆ.
ಇಷ್ಟೊಂದು ದೊಡ್ಡ ಪ್ರಮಾಣದ ಚಿನ್ನಾಭರಣ ಯಾರಿಗೆ ಸೇರಿದ್ದು? ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು? ಚುನಾವಣೆಗೇನಾದರೂ ಸಂಬಂಧವಿದೆಯಾ? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ಬೆಳಕಿಗೆ ಬರಬೇಕಾಗಿದೆ.

