ಶಿವಮೊಗ್ಗ (shivamogga), ಜನವರಿ 09: ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ನಗರದ ಹೊರವಲಯ ವಾಜಪೇಯಿ ಬಡಾವಣೆಯಲ್ಲಿರುವ ಬಿಸಿಎಂ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ಜನವರಿ 9 ರಂದು ಬೆಳಿಗ್ಗೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಗಣೇಶ್ (21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇವರು ಪೆಸೆಟ್ ಕಾಲೇಜ್ ನಲ್ಲಿ ಎಂಜಿನಿಯರಿಂಗ್ ಪದವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 3 ನೇ ವರ್ಷದ ಅಭ್ಯಾಸ ಮಾಡುತ್ತಿದ್ದರು. ಇವರು ಬಿಸಿಎಂ ಹಾಸ್ಟೆಲ್ ನಲ್ಲಿದ್ದು ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದರು.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಹಾಸ್ಟೆಲ್ ಬಾತ್ ರೂಂಗೆ ತೆರಳಿದ ಗಣೇಶ್ ದಿಡೀರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ವಾಹನವೊಂದರಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತಂತೆ ಬಿಸಿಎಂ ಇಲಾಖೆ ಅಧಿಕಾರಿ ಶೋಭಾರವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿ, ‘ಹಾಸ್ಟೆಲ್ ನ ವಾಶ್ ರೂಂನಲ್ಲಿ ಕುಸಿದು ಬಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ವಾಹನದಲ್ಲಿ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಗೆ ಹಾಸ್ಟೆಲ್ ಸಿಬ್ಬಂದಿಗಳು ಕರೆತಂದಿದ್ದಾರೆ. ಪರೀಕ್ಷಿಸಿದ ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದು, ಶವದ ಮರಣೋತ್ತರ ಪರೀಕ್ಷೆ ವರದಿಯ ನಂತರ ಸ್ಪಷ್ಟ ಕಾರಣ ತಿಳಿದುಬರಬೇಕಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
Shivamogga, January 09: An engineering student died of a heart attack at the post-matric government hostel in Vajpayee Layout on the outskirts of Shivamogga city.

