ಶಿವಮೊಗ್ಗ, ಮೇ 7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.
‘ಕಾಂಗ್ರೆಸ್ ಪಕ್ಷ ಹಾರಿ ಬಿಡುತ್ತಿರುವ ಸುಳ್ಳು ಭರವಸೆಯ ಬಲೂನ್ ಗಳನ್ನು ಕರ್ನಾಟಕದ ಜನತೆ ಚೂರುಚೂರು ಮಾಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಯ ಶುರುವಾಗಿದೆ. ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದವರನ್ನು ಮತ್ತೆ ಕರೆತಂದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರದ ಕುರಿತಂತೆ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿ ಎಲ್ಲಿಯೇ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ ತಾವು ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ನೀಟ್ ಪರೀಕ್ಷೆಯಿದ್ದ ಕಾರಣ ಬೆಳಿಗ್ಗೆಯೇ ರೋಡ್ ಶೋ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಎಚ್ಚರವಹಿಸಲಾಯಿತು ಎಂದು ಇದೇ ವೇಳೆ ನರೇಂದ್ರ ಮೋದಿ ಅವರು ಹೇಳಿದರು.
ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಬಮುಖಂಡರು ಉಪಸ್ಥಿತರಿದ್ದರು.

