ಶಿವಮೊಗ್ಗ (shivamogga), ಸೆಪ್ಟೆಂಬರ್ 06: ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಿಂದ ಪ್ರಾಯೋಗಿಕವಾಗಿ 3 ಟಿಎಂಸಿ ಯೋಜನೆಗೆ ಚಾಲನೆ ನೀಡಿರುವುದು ಅತ್ಯಂತ ಸಂತಸದ ವಿಷಯವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘು ಮೂರ್ತಿಯವರು ತಿಳಿಸಿದರು.
ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಯೋಜನೆಗೆ ಭದ್ರಾ ಮೇಲ್ದಂಡೆ ಯೋಜನೆ ಇನ್ ಟೇಕ್ ಪಾಯಿಂಟ್ ನಲ್ಲಿ ಭಾನುವಾರ
ಚಾಲನೆ ನೀಡಿ ಅವರು ಮಾತನಾಡಿದರು.
6-7 ದಶಕಗಳ ಹೋರಾಟದ ಫಲ ಇಂದು ಸಾಕಾರ ಆಗಿದೆ. ಇದಕ್ಕಾಗಿ ಹೋರಾಡಿದ ಎಲ್ಲ ಮಹನೀಯರು, ಸಂಘಗಳು, ಸಂಘಟನೆಗಳಿಗೆ, ಸಹಕರಿಸಿದ ಮಾನ್ಯ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ, ಉಸ್ತುವಾರಿ ಸಚಿವರುಗಳಿಗೆ, ರೈತರುಗಳಿಗೆ ಹೃದಯಪೂರ್ವಕ ವಂದನೆ ಸಲ್ಲುಸುತ್ತೇನೆ.
ಈ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ 12 ತಾಲ್ಲೂಕುಗಳಿಗೆ ನೀರು ಲಭಿಸಲಿದೆ. ತುಂಗಾದಿಂದ 17.4 TMC ನೀರನ್ನು ಭದ್ರಾಗೆ ಲಿಫ್ಟ್ ಮಾಡಿ, ಭದ್ರಾದಿಂದ 12.5 ಟಿಎಂಸಿ ಒಟ್ಟು 29.9 ಟಿಎಂಸಿ ನೀರನ್ನು ಲಿಫ್ಟ್ ಮಾಡಲಾಗುವುದು.
ಪ್ರಾಯೋಗಿಕವಾಗಿ 3 ಟಿಎಂಸಿ ನೀರು ಬಿಡುಗಡೆ:
ನೀರಾವರಿ ಯೋಜನೆಯಡಿ ಪ್ರಾಯೋಗಿಕವಾಗಿ 3 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲು ನೀರಾವರಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಈ ಯೋಜನೆಯು ಒಟ್ಟು 367 ಕೆರೆಗಳಿಗೆ ನೀರು ತುಂಬಿಸುವ ಹಾಗೂ 2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ ಉದ್ದೇಶವನ್ನು ಹೊಂದಿದೆ.
ಆದರೆ, ಪ್ರಸ್ತುತ ಹನಿ ನೀರಾವರಿ ಯೋಜನೆಯ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಮತ್ತು ಕೆರೆಗಳಿಗೆ ನೀರು ತುಂಬಿಸುವ ಕೆಲಸವೂ ಭಾಗಶಃ ಮಾತ್ರವಾಗಿದೆ. ಆದ್ದರಿಂದ, ಪ್ರಾಯೋಗಿಕ ಪ್ರಸ್ತುತ 3 ಟಿಎಂಸಿಗೆ ಮಾತ್ರ ಸೀಮಿತವಾಗಿ ನೀರು ಹರಿಸಲಾಗುತ್ತಿದೆ. ಮುಂದೆ ಇದು ಶಾಶ್ವತ ಯೋಜನೆಯಾಗಲಿದೆ.
ಇನ್ನೂ ಬೆಳೆಗಳಿಗೆ ಸಂಪೂರ್ಣ ನೀರಾವರಿ ಸೌಲಭ್ಯ ಕಲ್ಪಿಸಿಲ್ಲ ಹಾಗೂ ನೀರು ಎತ್ತುವ (ಲಿಫ್ಟ್) ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಮುಂದಿನ ಹಂತದ ಯೋಜನೆಗಳು ಜಾರಿಯಾಗಲಿವೆ. ಅಲ್ಲಿಯವರೆಗೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಸಹಕರಿಸಬೇಕು ಹಾಗೂ ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ಕೋರಿದರು.
ಈ ವೇಳೆ ಚಿತ್ರದುರ್ಗ ಕ್ಷೇತ್ರದ ಶಾಸಕರಾದ ಕೆ.ವೀರೇಂದ್ರ ಪಪ್ಪಿ, ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಣ್ಣ, ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ, ತರೀಕೆರೆ ಶಾಸಕರಾದ ಶ್ರೀನಿವಾಸ್, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.
Launch of the project to release 3 TMC of water on a trial basis from the Bhadra Dam to the Chitradurga branch canal.

