ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿದಾರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ

ಬೆಂಗಳೂರು, ಆ.4: ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡೆದಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶವಾದ ತೀರ್ಥಹಳ್ಳಿಯ ಮೇಗರವಳ್ಳಿ ಅರಣ್ಯ ಕಚೇರಿ ವ್ಯಾಪ್ತಿಯ ಕೊಕ್ಕೋಡು, ಶಿವಳ್ಳಿ ಗ್ರಾಮದ (ಲ್ಯಾಂಡ್ ಮಾರ್ಕ್ ಹುಲಿ ಗುಡ್ಡ) ಸರ್ವೆ ನಂಬರ್ 80ರಲ್ಲಿ  ಮರಗಳನ್ನು ಕಡಿದು, ಬುಡಕ್ಕೆ ಬೆಂಕಿ ಹಚ್ಚಿ ನೆಲಸಮ ಮಾಡಿ ಕಂದಾಯ ಭೂಮಿ ಎಂದು ಮಂಜೂರು ಮಾಡಿಸಿಕೊಳ್ಳುತ್ತಿದ್ದಾರೆ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಅರಣ್ಯ ನಾಶವಾದರೆ ಗುಡ್ಡ ಕುಸಿಯುವ ಭೀತಿ ಇದೆ ಎಂದು ಮಾಧ್ಯಮ ವರದಿಗಾರರಿಂದ ನಮ್ಮ ಕಚೇರಿಗೆ ಮಾಹಿತಿ ದೊರೆತ ತಕ್ಷಣವೇ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಆದೇಶ ನೀಡಲಾಗಿದ್ದು, ಒತ್ತುವರಿ ಮಾಡಿದ್ದ ಭೂಮಿಯನ್ನು ಮರುವಶ ಪಡಿಸಿಕೊಳ್ಳಲಾಗಿರುತ್ತದೆ ಮತ್ತು ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಅದೇ ರೀತಿ ಸೊರಬ ತಾಲ್ಲೂಕಿನ ಮುಟಗುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಳಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪರಿಭಾವಿತ – ಕಾನು ಅರಣ್ಯದಲ್ಲಿ ಅವಸಾನದ ಅಂಚಿನಲ್ಲಿರುವ ಕೊಡಸೆ, ಕಾಸರಕ, ಅಳಲೆ, ಹೊನ್ನೆ, ತಾರೆಯಂತಹ ಬೆಲೆ ಬಾಳುವ ಮರಗಳನ್ನು ಉರುಳಿಸಿ, ಬುಡಕ್ಕೆ ಬೆಂಕಿ ಹಚ್ಚಿ ಧ್ವಂಸ ಮಾಡಿ, ಜೆಸಿಬಿಗಳಿಂದ ನೆಲ ಮಟ್ಟ ಮಾಡಿ, ಖಾಸಗಿ ಅಡಿಕೆ ತೋಟ ಮಾಡಲಾಗಿದೆ ಎಂಬ ದೂರು ಬಂದ ಕೂಡಲೇ ಅಧಿಕಾರಿಗಳಿಗೆ ಸೂಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ಮಧ್ಯೆ ವಸತಿ ಪ್ರದೇಶಗಳ ಅಂಚಿನಲ್ಲಿರುವ ಕಾನನ ಪ್ರದೇಶದಲ್ಲಿ, ಪರಿಭಾವಿತ ಅರಣ್ಯ ಭೂಮಿಯಲ್ಲಿ ಕೆಲವರು ಅಡಕೆ ಸಸಿ ನೆಟ್ಟು ಬೇಲಿ ಹಾಕಿ, ಅಲ್ಲಿ ಬೆಳೆದ ಬೃಹತ್ ಮರಗಳನ್ನು ಕಡಿದು ನಕಲಿ ದಾಖಲೆ ಸೃಷ್ಟಿಸಿಕೊಂಡು ಅರಣ್ಯ ಒತ್ತುವರಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲಾಗಿರುವ ಎಲ್ಲ ಅಡಕೆ ಸಸಿ ತೆರವಿಗೆ ಆದೇಶ ನೀಡಲಾಗಿದೆ.

ಅರಣ್ಯ ಇಲಾಖೆಯ ಪ್ರಥಮ ಆದ್ಯತೆಯೇ ಕಾನನ, ವೃಕ್ಷ ಮತ್ತು ವನ್ಯಜೀವಿ ಸಂರಕ್ಷಣೆಯಾಗಿದೆ. ಅದೇ ವೇಳೆ 1978ಕ್ಕೆ ಮೊದಲು ಅರಣ್ಯ ಪ್ರದೇಶದಲ್ಲಿ ನೆಲೆಸಿದ್ದ ಹಾಗೂ ನಿಗದಿತ ಅವಧಿಯೊಳಗೆ  ಅರ್ಜಿ ಸಲ್ಲಿಸಿರುವ ಬಡ ರೈತರ, ಮನೆ ಕಟ್ಟಿಕೊಂಡಿರುವ ಬಡವರಿಗೂ ನ್ಯಾಯ ಒದಗಿಸಲು ನಿಯಮಾನುಸಾರ ಮಾನವೀಯ ನೆಲೆಗಟ್ಟಿನಲ್ಲಿ ತಾವು ಕಾರ್ಯನಿರ್ವಹಿಸುತ್ತಿರುವುದಾಗಿ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಅರಣ್ಯಗಳ್ಳರಿಗೆ ಖಂಡ್ರೆ ಎಚ್ಚರಿಕೆ: ಬೃಹತ್ ಪ್ರಮಾಣದಲ್ಲಿ ಎಕರೆಗಟ್ಟಲೆ ಅರಣ್ಯಭೂಮಿ ಒತ್ತುವರಿ ಮಾಡಿ, ಮರ ಕಡಿದು ರಸ್ತೆ ನಿರ್ಮಿಸಿ, ರೆಸಾರ್ಟ್, ಹೋಂಸ್ಟೇ ನಡೆಸುತ್ತಿರುವ ಹಾಗೂ ಹತ್ತಾರು ಎಕರೆ ತೋಟ ಮಾಡಿಕೊಂಡಿರುವ ಯಾರನ್ನೂ ಬಿಡುವುದಿಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →