ಬೆಂಗಳೂರು / ಶಿವಮೊಗ್ಗ, ಆ. 21: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ, ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

‘ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿದ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೆನೆ. ಈ ನೆಲದ ಸ್ವಾತಂತ್ರ್ಯ ಚಳುವಳಿ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ’ ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತಂತೆ ಸೋಮವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ‘ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೊಳಪಡಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
‘ಯಾರೊಬ್ಬರು ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು’ ಎಂದು ನಾಗರೀಕರಿಗೆ ಸಿಎಂ ಮನವಿ ಮಾಡಿದ್ದಾರೆ.

