ಶಿವಮೊಗ್ಗ, ಜ. 27: ಹಿರಿಯ ಕೆಎಎಸ್ ಅಧಿಕಾರಿಯೋರ್ವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು, ಯುವಕನೋರ್ವ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯ ಮನೆಯಲ್ಲಿ ಆಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಹಿಂದೆ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಹಿರಿಯ ಕೆಎಎಸ್ ಅಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರ ಶಿವಮೊಗ್ಗದ ಶರಾವತಿ ನಗರದ ನಿವಾಸದಲ್ಲಿ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನದ ಸಮಯದಲ್ಲಿ ಅವರ ನಿವಾಸದ ಆವರಣದಿಂದ ಹೋಂಡಾ ಆಕ್ಟಿವಾ ವಾಹನವನ್ನು ಯುವಕನೋರ್ವ ಕಳವು ಮಾಡಿ ಕೊಂಡೊಯ್ದಿದ್ದಾನೆ. ಈ ದೃಶ್ಯ ಮನೆಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸದರಿ ಸಿಸಿ ಕ್ಯಾಮರಾದ ದೃಶ್ಯಾವಳಿಯನ್ನು ಅಧಿಕಾರಿ ಕುಟುಂಬದವರು ಪೊಲೀಸರಿಗೆ ನೀಡಿದ್ದಾರೆ. ಇದರ ಆಧಾರದ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ಕಳ್ಳನ ಪತ್ತೆ ಕಾರ್ಯ ಕೈಗೊಂಡಿದ್ದಾರೆ.

