👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ, ಫೆ. 21: ಶಿವಮೊಗ್ಗ ನಗರದ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯದ ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮತಿ ನೀಡಿದೆ.
ಮತ್ತೊಂದೆಡೆ, ಮಂಗಳವಾರ (ಫೆ. 21) ದಿಂದಲೇ ವಿಮಾನಗಳ ಪ್ರಾಯೋಗಿಕ ಸಂಚಾರ ಕೂಡ ಆರಂಭವಾಗಲಿದೆ. ಈ ವಿಷಯವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಮಂಗಳವಾರ ಶಿವಮೊಗ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಇತ್ತೀಚೆಗೆ ಡಿಜಿಸಿಎ ತಂಡ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿಯಿತ್ತು ಕೂಲಂಕಷ ಪರಿಶೀಲನೆ ನಡೆಸಿತ್ತು. ನಿಲ್ದಾಣದಲ್ಲಿ ವಿಮಾನ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯ ಗಮನಿಸಿ, ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಿದೆ.
ಕಳೆದ ರಾತ್ರಿ ವಿಮಾನಗಳ ಸಂಚಾರಕ್ಕೆ ಡಿಜಿಸಿಎ ಅನುಮತಿ ದೊರಕಿದೆ. ಪ್ರಥಮ ಹಂತದ ಪರಿಶೀಲನೆಯಲ್ಲಿಯೇ ವಿಮಾನಗಳ ಹಾರಾಟಕ್ಕೆ ಅನುಮತಿ ದೊರಕಿದ ಹೆಗ್ಗಳಿಕೆ ಶಿವಮೊಗ್ಗ ನಿಲ್ದಾಣದ್ದಾಗಿದೆ ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ: ಫೆ. 27 ರಂದು 11.15 ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 10 ಗಂಟೆಯೊಳಗೆ ನಿಲ್ದಾಣದೊಳಗೆ ಸಾರ್ವಜನಿಕರು ಆಗಮಿಸಬೇಕು. ತದನಂತರ ಆಗಮಿಸುವ ನಾಗರೀಕರನ್ನು ಒಳಗಡೆ ಬಿಡುವುದಿಲ್ಲ. ಮಧ್ಯಾಹ್ನ 1 ಗಂಟೆಗೆ ಪ್ರಧಾನಿಯವರು ಶಿವಮೊಗ್ಗದಿಂದ ಬೆಳಗಾವಿಗೆ ತೆರಳಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.
ಪ್ರವೇಶ ನಿರ್ಬಂಧ: ವಿಮಾನಗಳ ಪ್ರಾಯೋಗಿಕ ಹಾರಾಟ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಸಕ್ಷಮ ಅಧಿಕಾರಿಗಳ ಅನುಮತಿಯಿಲ್ಲದೆ ವಿಮಾನ ನಿಲ್ದಾಣಕ್ಕೆ ಯಾರಿಗೂ ಪ್ರವೇಶ ಕಲ್ಪಿಸುತ್ತಿಲ್ಲವಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →