ಆಗಸ್ಟ್ 17 ರಿಂದ ರಾಜ್ಯದಲ್ಲಿ ಮಳೆ ನಿರೀಕ್ಷೆ : ತುಂಗಭದ್ರಾ ಜಲಾಶಯ ಮತ್ತೆ ಭರ್ತಿ – ಸಿಎಂ ವಿಶ್ವಾಸ
ಹೊಸಪೇಟೆ (hospet), ಆ. 13: ತುಂಗಭದ್ರಾ ಜಲಾಶಯ (tungabhadra dam) ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ತಿಳಿಸಿದರು.
ಅವರು ಇಂದು ತುಂಗಭದ್ರಾ ಅಣೆಕಟ್ಟು ಗೇಟ್ ಮುರಿದಿರುವ (tungabhadra dam broken gate) ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ (reservoir) ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ19 ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ (dam gates) ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ.
ತುಂಗಭದ್ರಾ ಅಣೆಕಟ್ಟು ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ.
ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.
ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ : ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ.
ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಆಗಸ್ಟ್ 17 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ
ಕರ್ನಾಟಕದಲ್ಲಿ ಸುಮಾರು 9 ಲಕ್ಷ ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17 ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ (rainfall) ಬರುವ ನಿರೀಕ್ಷೆ ಇದೆ ಎಂದರು.
ಘಟನೆ ಬಗ್ಗೆ ವಿಶ್ಲೇಷಣೆ ಅಗತ್ಯ : ಕೆಲವರ್ಷಗಳಿಂದ ಅಣೆಕಟ್ಟು ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ .
70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಇಂತಹ ಘಟನೆಗಳಿಗೆ ಯಾರು ಹೊಣೆ ಹೊರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ ಅಸ್ತಿತ್ವದಲ್ಲಿದ್ದು, ಇದರಲ್ಲಿ ಕೇಂದ್ರ ಜಲ ಆಯೋಗ ಹಾಗೂ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ರಾಜ್ಯದ ಸದಸ್ಯರೂ ಇದರಲ್ಲಿದ್ದಾರೆ. ಇಂತಹ ಘಟನೆಗಳಿಗೆ ಕಾರಣವೇನು ಎಂಬುದರ ಬಗ್ಗೆ ವಿಶ್ಲೇಷಣೆ ಅಗತ್ಯ ಎಂದರು.
ಬಾಗಿನ ಅರ್ಪಿಸಲು ನಾನೇ ಬರುತ್ತೇನೆ
ತುಂಗಭದ್ರಾ ಜಲಾಶಯ (tungabhadra) ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಆಗಮಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
