shimoga railway | ಬೆಂಗಳೂರು – ಶಿವಮೊಗ್ಗ ನಡುವೆ ವಂದೇ ಭಾರತ್ ರೈಲು ಸಂಚಾರ : ಸಚಿವರು ಹೇಳಿದ್ದೇನು?

Vande Bharat train movement between Bangalore – Shimoga: What did the minister say? ಬೆಂಗಳೂರು – ಶಿವಮೊಗ್ಗ ನಡುವೆ ವಂದೇ ಭಾರತ್ ರೈಲು ಸಂಚಾರ : ಸಚಿವರು ಹೇಳಿದ್ದೇನು?

ಶಿವಮೊಗ್ಗ (shimoga), ಸೆ. 26: ಶಿವಮೊಗ್ಗದ ಕೋಟೆಗಂಗೂರಿಲ್ಲಿ ನಡೆಯುತ್ತಿರುವ ಕೋಚಿಂಗ್ ಡಿಪೋ (ರೈಲುಗಳ ನಿರ್ವಹಣೆ – ದುರಸ್ತಿ) ಕೇಂದ್ರದ ಕಾಮಗಾರಿ ಪೂರ್ಣಗೊಂಡ ನಂತರ, ಇಲ್ಲಿಗೂ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (v somanna) ತಿಳಿಸಿದ್ದಾರೆ.

ಸೆ. 26 ರ ಗುರುವಾರ ಶಿವಮೊಗ್ಗದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಟರ್ಮಿನಲ್ ಕಾಮಗಾರಿ ವೀಕ್ಷಣೆ ನಡೆಸಿ ಅಧಿಕಾರಿಳಗೊಂದಿಗೆ ಚರ್ಚೆ ನಡೆಸಿದ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು (vande bharat railway) ಓಡಿಸಬೇಕೆಂಬ ಬೇಡಿಕೆ ಸಂಸದ ಬಿ.ವೈ.ರಾಘವೇಂದ್ರ ಅವರದ್ದಾಗಿದೆ. ಮುಂದಿನ ಕೆಲ ತಿಂಗಳುಗಳಲ್ಲಿ ರಾಜ್ಯಕ್ಕೆ 8 ವಂದೇ ಭಾರತ್ ರೈಲುಗಳು ಆಗಮಿಸಲಿದ್ದು, ಅದರಲ್ಲಿ ಒಂದನ್ನು ಶಿವಮೊಗ್ಗ ಮಾರ್ಗದಲ್ಲಿ ಓಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ ರಾಜ್ಯದಲ್ಲಿ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಆದರೆ ವಂದೇ ಭಾರತ್ ರೈಲುಗಳಿಗೆ ಕೋಚಿಂಗ್ ಡಿಫೋವಿಲ್ಲ. ಶಿವಮೊಗ್ಗದ ಕೋಟೆಗಂಗೂರು ಕೋಚಿಂಗ್ ಡಿಪೋದಲ್ಲಿ ವಂದೇ ಭಾರತ್ ರೈಲುಗಳಿಗೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಒಟ್ಟು 74 ಎಕರೆಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ, ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗುತ್ತಿದೆ. ರೈಟ್ಸ್(RITES) ಸಂಸ್ಥೆಯು ಕಾಮಗಾರಿ ನಡೆಸುತ್ತಿದೆ. ರೈಟ್ಸ್ ಸಂಸ್ಥೆಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಹಾಗೂ ಕಾಮಗಾರಿಯು ಗುಣಮಟ್ಟದಿಂದ ಕೂಡಿರುವಂತೆ ನಿರ್ವಹಿಸಬೇಕೆಂದು ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಿಕಾರಿಪುರ – ಶಿರಾಳಕೊಪ್ಪ- ರಾಣೆಬೆನ್ನೂರು ರೈಲ್ವೆಗೆ (shimoga shikaripura ranebennur railway line) ರೈತರಿಂದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಲಸಗಳು ನಡೆಯುತ್ತಿವೆ. ಸಂಸದರು ಜಿಲ್ಲೆಯಲ್ಲಿ ಉತ್ತಮ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಮೆಚ್ಚುಗೆ ವ್ಯ್ತಪಡಿಸಿದರು.

ರೈತರು-ಜಾನುವಾರು ಓಡಾಟಕ್ಕೆ ರಸ್ತೆ: ಈ ಭಾಗದ ರೈತರು, ಸ್ಥಳೀಯರು ಇಲ್ಲಿ ಆಚೆ ಕಡೆ ಓಡಾಡಲು ರಸ್ತೆ ಬೇಕೆಂದು ಮನವಿ ಮಾಡಿದ್ದು, ಜನ-ಜಾನುವಾರು ಓಡಾಡಲು ಅನುಕೂಲವಾಗುವಂತೆ ಆರ್‌ಓಬಿ ನಿರ್ಮಿಸಲು ಸೂಚಿಸಿದ್ದೇನೆ. ಹಾಗೂ ದೇವಸ್ಥಾನಕ್ಕೆ ಹೋಗಲು ದಾರಿ ಕೇಳಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಹಾಗೂ ಹಿಂದೆ ರೈಲ್ವೆ ಲೈನ್ ನಿರ್ಮಿಸಿದಾಗ ರೈತರಿಗೆ ಪರಿಹಾರ ಒದಗಿಲ್ಲ. ಒದಗಿಸುವಂತೆ ಕೋರಿದ್ದು, ರೈತರು ದಾಖಲಾತಿ ನೀಡಿದಲ್ಲಿ ಕಂದಾಯ ಮತ್ತು ರೈಲ್ವೇ ಇಲಾಖೆಯೊಂದಿಗೆ ಮಾತನಾಡುತ್ತೇನೆ ಎಂದರು.

ಸಂಸದರಾದ ಬಿ.ವೈ.ರಾಘವೇಂದ್ರ (mp b y raghavendra) ಮಾತನಾಡಿ, ಪ್ರಸ್ತುತ ಟರ್ಮಿನಲ್‌ನಲ್ಲಿ ಶೇ.25 ರಷ್ಟು ಕೆಲಸ ಆಗಿದೆ. ಕೆಲಸ ಶೀಘ್ರಗತಿಯಲ್ಲಿ ಆಗಬೇಕು. ಡಿಸೆಂಬರ್ ಒಳಗೆ ಪಿಟ್‌ಲೈನ್ ಆಗಬೇಕು ಎಂದರು. ಈ ವೇಳೆ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಭಾರತಿ ಶೆಟ್ಟಿ, ಧನಂಜಯ ಸರ್ಜಿ, ರೈಲ್ವೇ ಅಧಿಕಾರಿಗಳು ಹಾಜರಿದ್ದರು.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →