ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!

‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ.

ಬಿಜೆಪಿ – ಕಾಂಗ್ರೆಸ್ ನಲ್ಲಿ ಟಿಕೆಟ್ ಪೈಪೋಟಿ : ಜೆಡಿಎಸ್ ನಲ್ಲಿ ನಿಗೂಢ ಮೌನ!!

ಟಿಕೆಟ್ ಘೋಷಣೆ ಬೆನ್ನಲ್ಲೇ ಭುಗಿಲೇಳಲಿದೆಯಾ ಬಂಡಾಯ?

ಬಿ. ರೇಣುಕೇಶ್

ಶಿವಮೊಗ್ಗ, ಎ. 7: ‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ…’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…!

ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಎರಡು ವಾರವಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ.

ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ.

ಬಿಜೆಪಿ – ಕಾಂಗ್ರೆಸ್ ನಲ್ಲಿ ಟಿಕೆಟ್ ಗೆ ಪೈಪೋಟಿಯಿದೆ. ಎರಡೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಆದರೆ ಜೆಡಿಎಸ್ ಪಾಳೇಯದಲ್ಲಿ ಮಾತ್ರ ಇವ್ಯಾವ ಚಟುಟಿಕೆಗಳು ಗೋಚರವಾಗುತ್ತಿಲ್ಲ. ಕಳೆದೆರೆಡು ದಿನಗಳಿಂದ  ಆ ಪಕ್ಷದ ಕಾರ್ಯಕರ್ತರು ಕರಪತ್ರ ವಿತರಣೆಗೆ ಚಾಲನೆ ನೀಡಿರುವುದಷ್ಟೆ ಹೊಸ ಬೆಳವಣಿಗೆಯಾಗಿದೆ.

ಬಿಜೆಪಿ: ಆಡಳಿತಾರೂಢ ಬಿಜೆಪಿ ಪಕ್ಷದಿಂದ, ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸಲಿದ್ದಾರಾ? ಇಲ್ಲವೇ ಅವರ ಪುತ್ರ ಕೆ.ಇ.ಕಾಂತೇಶ್ ಗೆ ಅವಕಾಶ ಸಿಗಲಿದೆಯಾ? ಅಪ್ಪ – ಮಗನ ಹೊರತಾಗಿ ಬೇರೆಯವರು ಅಖಾಕ್ಕಿಳಿಯಲಿದ್ದಾರಾ? ಎಂಬ ಕುತೂಹಲವಿದೆ. ಯಾರು ಅಭ್ಯರ್ಥಿಯಾಗಲಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಾಗದಂತಹ ಸ್ಥಿತಿ ಬಿಜೆಪಿಯಲ್ಲಿದೆ.

ಈ ನಡುವೆ ಆ ಪಕ್ಷದ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಯಾವ ಪಕ್ಷದಿಂದ ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

ಕಾಂಗ್ರೆಸ್: ಕಾಂಗ್ರೆಸ್ ಪಕ್ಷದಲ್ಲಿ  ಟಿಕೆಟ್ ಕೋರಿ 11 ಜನ ಅರ್ಜಿ ಸಲ್ಲಿಸಿದ್ದಾರೆ. ಕಳೆದೆರೆಡು ವಾರಗಳ ಹಿಂದೆ ಟಿಕೆಟ್ ಪೈಪೋಟಿ ಆ ಪಕ್ಷದಲ್ಲಿ ಜೋರಾಗಿತ್ತು. ಕೆಲ ಸ್ಪರ್ಧಾಕಾಂಕ್ಷಿಗಳು ಭಾರೀ ಲಾಬಿ ನಡೆಸಿದ್ದರು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಕಾರ್ಪೋರೇಟರ್ ಹೆಚ್.ಸಿ.ಯೋಗೇಶ್ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು.

ಈ ನಡುವೆ ದಿಢೀರ್ ಆಗಿ ಬಿಜೆಪಿ ಬಂಡಾಯ ನಾಯಕ ಆಯನೂರು ಮಂಜುನಾಥ್ ಹೆಸರು ಕೇಳಿಬರಲಾರಂಭಿಸಿದೆ. ಇದು ಕೆಲ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದೆ. ಇದರಿಂದ ಕಾಂಗ್ರೆಸ್ ವರಿಷ್ಠರು ಯಾರ ‘ಕೈ’ ಹಿಡಿಯಲಿದ್ದಾರೆಂಬುವುದು ಗೊತ್ತಾಗುತ್ತಿಲ್ಲ.

ಜೆಡಿಎಸ್: ಬಿಜೆಪಿ-ಕಾಂಗ್ರೆಸ್ ನಲ್ಲಿ ಟಿಕೆಟ್ ರಾಜಕಾರಣ ಕಾವೇರಿದ್ದರೆ, ಜೆಡಿಎಸ್ ನಲ್ಲಿ ಇವ್ಯಾವ ಪೈಪೋಟಿಯೂ ಕಂಡುಬರುತ್ತಿಲ್ಲ. ಇದರಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುತ್ತಾ? ಇಲ್ಲವೇ? ಎಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುವಂತಾಗಿದೆ!

ಆದರೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾದ ನಂತರ, ತನ್ನ ಪಕ್ಷದ ಹುರಿಯಾಳು ಯಾರೆಂಬುವುದನ್ನು ಪ್ರಕಟಿಸಲು ಜೆಡಿಎಸ್ ವರಿಷ್ಠರು ಚಿಂತಿಸುತ್ತಿದ್ದಾರೆ. ಟಿಕೆಟ್ ಸಿಗದೆ ಅಸಮಾಧಾನಗೊಂಡು ಪಕ್ಷದ ಕದ ತಟ್ಟುವ ‘ಪ್ರಭಾವಿ’ಗಳಿಗೆ ಮಣೆ ಹಾಕುವ ಸಾಧ್ಯಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.  

ಎಎಪಿ: ಈ ಮೂರು ಪ್ರಮುಖ ಪಕ್ಷಗಳಿಗೆ ಹೋಲಿಸಿದರೆ, ಆಮ್ ಆದ್ಮಿ ಪಕ್ಷವು ಚುನಾವಣೆ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿ ಹೆಸರು ಪ್ರಕಟಿಸಿದೆ. ಟಿ.ನೇತ್ರಾವತಿ ಅವರು ಎಎಪಿ ಅಭ್ಯರ್ಥಿಯಾಗಿದ್ದಾರೆ. ಉಳಿದಂತೆ ನಾಮಪತ್ರ ಸಲ್ಲಿಕೆ ಆರಂಭವಾದ ನಂತರ ಇತರೆ ರಾಜಕೀಯ ಪಕ್ಷಗಳಿಂದ, ಪಕ್ಷೇತರರಾಗಿ ಯಾರೆಲ್ಲ ಕಣಕ್ಕಿಳಿಯಲಿದ್ದಾರೆಂಬುವುದು ಸ್ಪಷ್ಟವಾಗಿದೆ.

ಒಟ್ಟಾರೆ ಪ್ರಮುಖ ಪಕ್ಷಗಳ ಟಿಕೆಟ್ ಘೋಷಣೆ ನಂತರ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಿದೆ. ಜಿದ್ದಾಜಿದ್ದಿನ ಅಖಾಡಕ್ಕೆ ಕ್ಷೇತ್ರ ಸಾಕ್ಷಿಯಾಗಲಿರುವುದಂತೂ ಸತ್ಯವಾಗಿದೆ!

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *