ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ!

#ವಿಧಾನಸಭೆಚುನಾವಣೆಸಾರ್ವಜನಿಕ ಸಮಸ್ಯೆಗಳ ಕಡೆಗಣನೆ, ನೀತಿಸಂಹಿತೆ ನೆಪ - ಹೆಚ್ಚಾಗುತ್ತಿರುವ ನಾಗರೀಕರ ಪರಿತಾಪ! ಮತ ಬೇಟೆಯಲ್ಲಿ ಮುಳುಗಿದ ಜನಪ್ರತಿನಿಧಿಗಳು : ಆಲಿಸುವವರಿಲ್ಲ ನಾಗರೀಕರ ಗೋಳು!!

-ಬಿ.ರೇಣುಕೇಶ್-

‘ಒಂದೆಡೆ, ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲ ತಾಪ… ಮತ್ತೊಂದೆಡೆ, ವಿಧಾನಸಭೆ ಚುನಾವಣೆಯ ಪರಿತಾಪ… ‘ಮತ ಬೇಟೆ’ಯಲ್ಲಿ ಮುಳುಗಿರುವ ಜನಪ್ರತಿನಿಧಿಗಳು… ಚುನಾವಣಾ ಕೆಲಸಕಾರ್ಯಗಳಲ್ಲಿ ತಲ್ಲೀನವಾಗಿರುವ ಅಧಿಕಾರಿಗಳು… ಇದೆಲ್ಲದರ ಪರಿಣಾಮದಿಂದ ನೆನೆಗುದಿಗೆ ಬೀಳಲಾರಂಭಿಸಿದೆ ನಾಗರೀಕ ಸಮಸ್ಯೆಗಳು..!’

ಹೌದು. ವಿಧಾನಸಭೆ ಚುನಾವಣೆ ಪ್ರಕ್ರಿಯೆಯಗಳು ಆರಂಭವಾದ ನಂತರ, ಸಾರ್ವಜನಿಕ ಸಮಸ್ಯೆಗಳಿಗೆ ಆಡಳಿತ ಯಂತ್ರದ ಸ್ಪಂದನೆ ಕಡಿಮೆಯಾಗುತ್ತಿರುವ ದೂರುಗಳು ಕೇಳಿಬರಲಾರಂಭಿಸಿದೆ. ಸಮಸ್ಯೆಗಳ ಪರಿಹಾರಕ್ಕೆ ಅಲೆದಾಡುವಂತಾಗಿದೆ. ಇದು ಸಹಜವಾಗಿಯೇ, ನಾಗರೀಕರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ. ಯಾವಾಗ ಚುನಾವಣೆ ಮುಗಿಯುತ್ತದೆಯೋ? ಎಂದು ಕಾದು ಕುಳಿತುಕೊಳ್ಳುವಂತೆ ಮಾಡಿದೆ.   

‘ಕೆಲ ಅಧಿಕಾರಿ-ಸಿಬ್ಬಂದಿಗಳು, ಸಣ್ಣಪುಟ್ಟ ಕೆಲಸ ಕಾರ್ಯಗಳಿಗೂ ಚುನಾವಣೆ ನೆಪ ಹೇಳುತ್ತಿದ್ದಾರೆ. ಮಾದರಿ ನೀತಿ-ಸಂಹಿತೆ ಅಡ್ಡಿಯಾಗುತ್ತದೆ ಎನ್ನುತ್ತಾರೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಯಾಗದವರು, ಚುನಾವಣಾ ಕೆಲಸದಲ್ಲಿರುವುದಾಗಿ ತಿಳಿಸುತ್ತಾರೆ. ಅಹವಾಲು ಕೇಳುವವರೇ ಇಲ್ಲವಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ’ ಎಂದು ಕೆಲ ನಾಗರೀಕರು ತಮ್ಮ ಅಳಲು ತೋಡಿಕೊಳ್ಳುತ್ತಾರೆ.

‘ಕೆಲವೆಡೆ ಅಭಿವೃದ್ದಿ ಕೆಲಸಕಾರ್ಯಗಳು ಅರ್ಧಕ್ಕೆ ಸ್ಥಗಿತಗೊಂಡಿವೆ. ಅರ್ಧಂಬರ್ಧ ರಸ್ತೆ ಕಾಮಗಾರಿ ಮಾಡಿ ನಿಲ್ಲಿಸಲಾಗಿದೆ. ಚುನಾವಣೆ ಹಾಗೂ ಮಾದರಿ ನೀತಿ ಸಂಹಿತೆ ಅಡ್ಡಿಯಾಗದಿದ್ದರೂ ಕುಂಟು ನೆಪ, ಆಡಳಿತಾತ್ಮಕ ಅಡೆತಡೆ ಮುಂದಿಟ್ಟು ತೊಂದರೆ ಕೊಡಲಾಗುತ್ತಿದೆ’ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಗೋಳು: ಪ್ರಸ್ತುತ ಬಿಸಿಲ ಬೇಗೆ ತೀವ್ರವಾಗಿದೆ. ಗ್ರಾಮೀಣ ಭಾಗದಲ್ಲಿ ಅಂತರ್ಜಲ ಮಟ್ಟ ಗಂಭೀರವಾಗಿ ಕುಸಿಯುತ್ತಿದೆ. ಕುಡಿಯುವ ನೀರಿನ ಹಾಹಾಕಾರ ತಲೆದೋರುತ್ತಿದೆ. ತೋಟ, ಹೊಲಗದ್ದೆಗಳಲ್ಲಿ ಬೆಳೆದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ಪೈರುಗಳು ಒಣಗುತ್ತಿವೆ.

ಮತ್ತೊಂದೆಡೆ, ಜಾನುವಾರುಗಳು ಹಸಿರು ಮೇವಿಲ್ಲದೆ ಪರದಾಡುತ್ತಿವೆ. ಹಸಿವು ಇಂಗಿಸಿಕೊಳ್ಳಲು ಪ್ಲ್ಯಾಸ್ಟಿಕ್, ಪೇಪರ್ ಮತ್ತೀತರ ತ್ಯಾಜ್ಯ ವಸ್ತು ತಿಂದು ಅನಾರೋಗ್ಯಕ್ಕೆ ತುತ್ತಾಗಿ ಮೂಕಪ್ರಾಣಿಗಳು ಇಹಲೋಕ ತ್ಯಜಿಸುತ್ತಿವೆ.

ಆದರೆ ಎಲ್ಲಿಯೂ ಮೇವು ಬ್ಯಾಂಕ್ ತೆರೆದಿಲ್ಲ. ಪಶು ಪಾಲಕರಿಗೆ ರಿಯಾಯ್ತಿ ದರದಲ್ಲಿ ಮೇವು ವಿತರಣೆ ಮಾಡಿ, ಮೂಕಪ್ರಾಣಿಗಳಿಗೆ ನೆರವಾಗುವ ಕಾರ್ಯ ನಡೆಸಿಲ್ಲ ಎಂದು ಕೆಲ ಪಶುಪಾಲಕರು ದೂರುತ್ತಾರೆ.

ಗಮನಹರಿಸಲಿ: ಇನ್ನೂ ಹತ್ತು ಹಲವು ಸಾರ್ವಜನಿಕ ದೂರು-ದುಮ್ಮಾನಗಳು ಕೇಳಿಬರುತ್ತಿವೆ. ಚುನಾವಣೆಯ ಜೊತೆಜೊತೆಗೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಆಡಳಿತದ ಗುರುತರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಈ ಸಂಬಂಧ ಅಧಿಕಾರಿ-ಸಿಬ್ಬಂದಿಗಳಿಗೆ ಖಡಕ್ ಸೂಚನೆ ರವಾನಿಸಬೇಕು. ನೆಪ ಹೇಳದೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಸುವಂತೆ ತಾಕೀತು ಮಾಡಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *