ಶಿವಮೊಗ್ಗ (shivamogga), ಮೇ 22 : ಜಿಲ್ಲೆಯ ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಅಣುಸ್ಥಾವರ ನಿರ್ಮಾಣ ಮಾಡಬಾರದು. ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಬೇಕು ಎಂದು ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.
ಮೇ 22 ರಂದು ನಗರದ ಜಿ.ಪಂ. ಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದರಿ ಎರಡು ವಿಷಯಗಳ ಕುರಿತಂತೆ ನಿರ್ಣಯ ಕೈಗೊಳ್ಳಲಾಗಿದೆ.
‘ಅಣುಸ್ಥಾವರ ಆಗಲು ಬಿಡುವುದಿಲ್ಲ. ಹಾಗೆಯೇ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು. ಈ ಕುರಿತಂತೆ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜಲಾಶಯಗಳ ನಿರ್ಮಾಣದಿಂದ ಎರಡು ಬಾರಿ ಜನರು ನಿರಾಶ್ರಿತರಾಗಿ ಈಗಾಗಲೇ ಬೇಸತ್ತಿದ್ದಾರೆ. ಇದೀಗ ಬೇಸೂರು ಅಣುಸ್ಥಾವರ ಪ್ರಸ್ತಾಪದ ಬಗ್ಗೆ ರೈತರು ಬಹಳ ಭಯದಲ್ಲಿದ್ದಾರೆ. ಬೇಸೂರು ಅಣು ಸ್ಥಾವರ ಮಾಡಲು ಸಚಿವರು, ಶಾಸಕರು ಬಿಡುವುದಿಲ್ಲ ಎಂದರು.
ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗಕ್ಕೆ ಅನುಕೂಲವಾಗಲಿದೆ. ಸರ್ವಾನುಮತದಿಂದ ಪೀಠ ಸ್ಥಾಪನೆಗೆ ಒತ್ತಾಯಿಸುತ್ತೆವೆ ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ವಿಷಯಗಳ ಕುರಿತಂತೆ ಚರ್ಚೆ ನಡೆಯಿತು. ಶಾಸಕರು, ಕೆಡಿಪಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

