ಶಿವಮೊಗ್ಗ (shivamogga), ಜೂನ್ 30: ಪ್ರಸ್ತುತ ವರ್ಷ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ, ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಾಸಕರ ಕಚೇರಿಯ ಕರ್ತವ್ಯ ಭವನದಲ್ಲಿ ಮಹಾನಗರ ಪಾಲಿಕೆ, ಜಲ ಮಂಡಳಿ, ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಜಂಟಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ನಗರದ ಮೂಲಕ ಹಾದು ಹೋಗಿರುವ ತುಂಗಾ ನಾಲೆಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಹಾಗೂ ಅಭಿವೃದ್ದಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನಾ ಮಂಡಳಿ ನಡುವೆ ಸಮನ್ವಯತೆಯ ಕೊರತೆಯಿಂದ ಸಾರ್ವಜನಿಕ ಕಾಮಗಾರಿಗಳಿಗೆ ಅಡ್ಡಿಯಾಗಬಾರದು. ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಜಲಕ್ಷಾಮ : ತುಂಗಾ ಜಲಾಶಯದಲ್ಲಿ ಸದ್ಯ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ನಗರದ ದೈನಂದಿನ ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಮಳೆಯ ಕೊರತೆಯಿರುವುದರಿಂದ ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಜಲಕ್ಷಾಮವನ್ನು ಎದುರಿಸಲು ಈಗಿನಿಂದಲೇ ವೈಜ್ಞಾನಿಕ ನೀರಿನ ಪೂರೈಕೆ ಯೋಜನೆ ಹಾಗೂ ತುರ್ತು ತಾಂತ್ರಿಕ ಕ್ರಮ ಕೈಗೊಳ್ಳಲು ಶಾಸಕರು ಸೂಚಿಸಿದ್ದಾರೆ. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಸೇರಿದಂತೆ ಪಾಲಿಕೆ, ಜಲ ಮಂಡಳಿ, ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಉಪಸ್ಥಿತರಿದ್ದರು.


