*ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!
ಶಿವಮೊಗ್ಗ, ಆ. 14: ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿದ ಕಳ್ಳರ ತಂಡವೊಂದು, ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳವು ಮಾಡಿ ಕೊಂಡೊಯ್ದ ಘಟನೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.

ಕಳ್ಳರು ಎರಡು ಜಾನುವಾರುಗಳನ್ನು ಕಾರಲ್ಲಿ ತುಂಬಿಕೊಂಡು ಹೋಗುತ್ತಿರುವ ಕೃತ್ಯವು, ಸಮೀಪದ ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
‘ರಾಮಾನಾಯ್ಕ್ ಹಾಗೂ ಉಮೇಶ್ ನಾಯ್ಕ್ ಎಂಬುವರಿಗೆ ಈ ಜಾನುವಾರುಗಳು ಸೇರಿದ್ದಾಗಿವೆ. ಕಳೆದ ಕೆಲ ತಿಂಗಳುಗಳಿಂದ ಗ್ರಾಮದಲ್ಲಿ ಜಾನುವಾರುಗಳ ಕಳವು ಮಾಡಲಾಗುತ್ತಿದೆ.

ಇತ್ತೀಚೆಗೆ ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಎರಡು ಆಕಳುಗಳನ್ನು ಕಳವು ಮಾಡಲಾಗಿದೆ. ಇದು ಗ್ರಾಮದ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಕೂಡ ಸಿಸಿ ಕ್ಯಾಮರಾದ ದೃಶ್ಯಾವಳಿ ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಗ್ರಾಮದಲ್ಲಿ ನಡೆಯುತ್ತಿರುವ ಜಾನುವಾರು ಕಳವು ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕು’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೂದ್ಯನಾಯ್ಕ್ ಅವರು ಆಗ್ರಹಿಸಿದ್ದಾರೆ.

