ಶಿವಮೊಗ್ಗ, ಸೆ. 9: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ, ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಗುರುವಾರ ಸಂಭವಿಸಿದೆ.

ಶಿವಮೊಗ್ಗದ ಇಲಿಯಾಸ್ ನಗರದ ನಿವಾಸಿ ಅಫ್ತಾಬ್ ಬಾಷಾ (40) ಹಾಗೂ ಬಾಲಕಿ ಮದೀನಾ (12) ಮೃತಪಟ್ಟವರೆಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕುಟುಂಬ ಸದಸ್ಯರು ಹಾಗೂ ಮತ್ತೊಂದು ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಫ್ತಾಬ್ ಬಾಷಾ ಅವರು ಕುಟುಂಬ ಸದಸ್ಯರೊಂದಿಗೆ, ಶಿವಮೊಗ್ಗದಿಂದ ಚೆನ್ನಗಿರಿಗೆ ತೆರಳುತ್ತಿದ್ದರು. ಮತ್ತೊಂದು ಕಾರು ಚಿತ್ರದುರ್ಗದ ಕಡೆಯಿಂದ ಶಿವಮೊಗ್ಗದೆಡೆಗೆ ಬರುತ್ತಿದ್ದು, ಸದರಿ ಕಾರಿನಲ್ಲಿ ಮೂರು ಜನರಿದ್ದು ಅವರೆಲ್ಲರು ಬೆಂಗಳೂರಿನ ನಿವಾಸಿಗಳಾಗಿದ್ದಾರೆ ಎಂದು ಹೇಳಲಾಗಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಒಂದು ಕಾರು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ವಿವರದ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

