ಶಿವಮೊಗ್ಗ, ನ. 22: ಕಾಡಾನೆಗಳ ನಿರಂತರ ದಾಳಿಯಿಂದ ಗದ್ದೆ – ತೋಟಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗುತ್ತಿದ್ದು, ಕಾಡಾನೆಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾಲಿಗೆರೆ ಗ್ರಾಮಸ್ಥರು ದೂರಿದ್ದಾರೆ.
ಸಾಲಿಗೆರೆ ಗ್ರಾಮಕ್ಕೆ ಮಂಗಳವಾರ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಆಕ್ರೋಶಭರಿತ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕಳೆದ ನಾಲ್ಕೈದು ವರ್ಷಗಳಿಂದ ಸಾಲಿಗೆರೆ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಗದ್ದೆ, ತೋಟಗಳಲ್ಲಿ ಕಷ್ಟಪಟ್ಟು ಬೆಳೆದ ಬೆಳೆ ಹಾಳಾಗುತ್ತಿದೆ. ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳದ ಕಾರಣದಿಂದ ರೈತರು ತೊಂದರೆ ಪಡುವಂತಾಗಿದೆ ಎಂದು ಸ್ಥಳಿಯರು ದೂರಿದ್ದಾರೆ.
ತಕ್ಷಣವೇ ಕಾಡಾನೆಗಳು ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

