ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..!

The Shimoga city area has not been revised for exactly 25 years..! ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ!

ಶಿವಮೊಗ್ಗ, ಡಿ. 26: ಜನಸಂಖ್ಯೆ ಹಾಗೂ ಪ್ರದೇಶಗಳ ಅಭಿವೃದ್ದಿಗೆ ಅನುಗುಣವಾಗಿ, ಕಾಲಕಾಲಕ್ಕೆ ನಗರ – ಪಟ್ಟಣಗಳ ವ್ಯಾಪ್ತಿ ಪರಿಷ್ಕರಣೆ ಮಾಡಲಾಗುತ್ತದೆ. ಆದರೆ ದೇಶದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಎರಡನೇ ಹಂತದ ನಗರಗಳಲ್ಲೊಂದಾದ, ಶಿವಮೊಗ್ಗ ನಗರ ವ್ಯಾಪ್ತಿಯು ಕಳೆದ 25 ವರ್ಷಗಳಿಂದ ಪರಿಷ್ಕರಣೆಯೇ ಆಗಿಲ್ಲ..!

ಆಡಳಿತ ಯಂತ್ರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ, ನಗರ ವ್ಯಾಪ್ತಿ ಪರಿಷ್ಕರಣೆಯ ಪ್ರಮುಖ ಆಡಳಿತಾತ್ಮಕ ವಿಷಯವು ಸಂಪೂರ್ಣ ನೆನೆಗುದಿಗೆ ಬಿದ್ದಿದೆ. ಇದರಿಂದ ಅಸ್ತವ್ಯಸ್ತವಾಗಿ ನಗರ ಬೆಳೆಯುವಂತಾಗಿದೆ. ಹಾಗೆಯೇ ನಾಗರೀಕರು ಮೂಲಸೌಕರ್ಯ ಸಮಸ್ಯೆಗಳಿಂದ ಪರಿತಪಿಸುವಂತಾಗಿದೆ.

ಕಾಲು ಶತಮಾನ! : 1997-98 ರ ವೇಳೆ ಅಂದಿನ ನಗರಸಭೆ ಆಡಳಿತಾವಧಿಯಲ್ಲಿ, ಶಿವಮೊಗ್ಗ ನಗರ ವ್ಯಾಪ್ತಿ ಪರಿಷ್ಕರಿಸಲಾಗಿತ್ತು. ಗ್ರಾಮ ಪಂಚಾಯ್ತಿ ಅಧೀನದಲ್ಲಿದ್ದ ನಗರದಂಚಿನ ಗ್ರಾಮಗಳಾದ ಗಾಡಿಕೊಪ್ಪ, ಕಾಶೀಪುರ, ಸೋಮಿನಕೊಪ್ಪ, ನವುಲೆ ಸೇರಿದಂತೆ ಮೊದಲಾದ ಗ್ರಾಮಗಳನ್ನು ನಗರಸಭೆಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ತದನಂತರ 2013-14 ರಲ್ಲಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲಾಗಿತ್ತು.  ಆದಾಗ್ಯೂ ಇಲ್ಲಿಯವರೆಗೂ (2023) ನಗರ ವ್ಯಾಪ್ತಿ ಪರಿಷ್ಕರಣೆಯಾಗಿಲ್ಲ.

ಬೆಳವಣಿಗೆ : ಸದ್ಯ ನಗರದಂಚಿನ ಗ್ರಾಪಂ ಅಧೀನದಲ್ಲಿ ದೊಡ್ಡ ದೊಡ್ಡ ಬಡಾವಣೆಗಳು ನಿರ್ಮಾಣವಾಗಿವೆ. ಹೊಸ ಹೊಸ ಆರ್ಥಿಕ, ವಾಣಿಜ್ಯ – ವಹಿವಾಟು ಸಂಬಂಧಿತ ಚಟುವಟಿಕೆಗಳು ಅಭಿವೃದ್ದಿಯಾಗಿವೆ. ಸಾವಿರಾರು ಜನರು ವಾಸಿಸುತ್ತಿದ್ದಾರೆ.

ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗುವ ಅರ್ಹತೆ ಹೊಂದಿದ್ದರೂ ಗ್ರಾಪಂ ಅಧೀನದಲ್ಲಿಯೇ ಬಡಾವಣೆಗಳಿವೆ. ಆದರೆ ಸ್ಥಳೀಯ ಗ್ರಾಮ ಪಂಚಾಯ್ತಿ ಆಡಳಿತಗಳಿಂದ, ಸಮರ್ಪಕವಾಗಿ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ನಾಗರೀಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

ಶಿವಮೊಗ್ಗ ನಗರದಂಚಿನ ಬಡಾವಣೆಗಳನ್ನು ಸೇರ್ಪಡೆ ಮಾಡಿಕೊಂಡು, ಮಹಾನಗರ ಪಾಲಿಕೆ ವಾರ್ಡ್ ಗಳ ವೈಜ್ಞಾನಿಕ ಪರಿಷ್ಕರಣೆ ಮಾಡಬೇಕೆಂಬ ಆಗ್ರಹ ಕಳೆದ ಹಲವು ವರ್ಷಗಳಿಂದಿದೆ. ಈ ಹಿಂದಿನ ನಗರಸಭೆ ಆಡಳಿತಾವಧಿಯಲ್ಲಿದ್ದ 35 ವಾರ್ಡ್ ಗಳೇ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ನಂತರವೂ ಮುಂದುವರಿಸಿಕೊಂಡು ಬರಲಾಗುತ್ತಿದೆ. ಇದರಿಂದ ನಾಗರೀಕರಿಗೆ ತೊಂದರೆಯಾಗುತ್ತಿದೆ. ಪ್ರಸ್ತುತ ಜನಸಂಖ್ಯೆ, ವ್ಯಾಪ್ತಿಗೆ ಅನುಗುಣವಾಗಿ ಕನಿಷ್ಠ 50 ರಿಂದ 60 ವಾರ್ಡ್ ಗಳ ರಚನೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರಲಾರಂಭಿಸಿದೆ.

ಗ್ರಾಪಂ ಅಧೀನದ ಬಡಾವಣೆಗಳ ಗೋಳು ಕೇಳೊರಿಲ್ಲ..!

*** ಶಿವಮೊಗ್ಗ ನಗರದಂಚಿನಲ್ಲಿರುವ ಅಬ್ಬಲಗೆರೆ, ಕೋಟೆಗಂಗೂರು, ನಿಧಿಗೆ, ಮುದ್ದಿನಕೊಪ್ಪ ಸೇರಿದಂತೆ ಕೆಲ ಗ್ರಾಮ ಪಂಚಾಯ್ತಿ ಅಧೀನಗಳಲ್ಲಿ ಕಳೆದ 15 ವರ್ಷಗಳ ಅವಧಿಯಲ್ಲಿ ಭಾರೀ ದೊಡ್ಡ ಸಂಖ್ಯೆಯ ಬಡಾವಣೆಗಳು ಅಭಿವೃದ್ದಿಯಾಗಿವೆ. ಸಾವಿರಾರು ಜನರು ವಾಸಿಸುತ್ತಿದ್ದಾರೆ. ಹಲವು ಗ್ರಾಪಂಗಳ ಅಧೀನದಲ್ಲಿ ದೊಡ್ಡದೊಡ್ಡ ಬಡಾವಣೆಗಳು ನಿರ್ಮಾಣವಾಗಿವೆ. ಆದರೆ ಬಡಾವಣೆಗಳ ನಿರ್ವಹಣೆಗೆ ಅಗತ್ಯವಾದ ಸೌಲಭ್ಯ ಗ್ರಾಪಂ ಆಡಳಿತಗಳಲ್ಲಿ ಇಲ್ಲವಾಗಿದೆ. ಒಳಚರಂಡಿ (ಯುಜಿಡಿ) ನಿರ್ವಹಣೆ, ಘನತ್ಯಾಜ್ಯ ವಿಲೇವಾರಿ, ಚರಂಡಿ, ರಸ್ತೆಗಳ ನಿರ್ಮಾಣ, ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆಗುತ್ತಿಲ್ಲ. ಸ್ಥಳೀಯ ನಾಗರೀಕರಂತೂ ತೀವ್ರ ತೊಂದರೆ ಎದುರಿಸುವಂತಾಗಿದೆ. ಗ್ರಾಪಂ ಆಡಳಿತಗಳಿಗೂ ಇಂತಹ ಬಡಾವಣೆಗಳು ಹೊರೆಯಾಗಿ ಪರಿಣಮಿಸುತ್ತಿವೆ. ಆಡಳಿತದ ನಿರ್ಲಕ್ಷ್ಯಕ್ಕೆ ಜನಸಾಮಾನ್ಯರು ತೊಂದರೆ ಪಡುವಂತಾಗಿದೆ.  

*** ಕಳೆದ ಕೆಲ ತಿಂಗಳುಗಳ ಹಿಂದೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಮಾಡುವ ಕುರಿತಂತೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಹಾಲಿ ಸರ್ಕಾರದ ಅವಧಿಯಲ್ಲಾದರೂ ಶಿವಮೊಗ್ಗ ನಗರ ವ್ಯಾಪ್ತಿ ಪರಿಷ್ಕರಣೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಗರಾಭಿವೃದ್ದಿ ಸಚಿವರು ಕಾಲಮಿತಿಯೊಳಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆಯೇ? ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *