ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ..!

ಶಿವಮೊಗ್ಗ, ಮಾ. 4: ಶಿವಮೊಗ್ಗ ನಗರದ  ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ನಗರದ  ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಶಮಂತ ಯಾನೆ ಶಮಂತನಾಯ್ಕ್ (30) ಹಾಗೂ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಸಂದೀಪ್ ಯಾನೆ ಸಂದೀಪ್ ಕುಮಾರನಾಯ್ಕ್ (27) ಎಂಬುವರ ವಿರುದ್ದ ಗೂಂಡಾ ಕಾಯ್ದೆ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಈ ಕುರಿತಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.  ‘ಈ ಇಬ್ಬರು ಆರೋಪಿಗಳ ವಿರುದ್ದ ಕೊಲೆ, ಕೊಲೆ ಯತ್ನ, ದರೋಡೆ, ಹಲ್ಲೆ, ಸುಲಿಗೆ, ದೊಂಬಿ, ಕೋಮು ಗಲಭೆ, ಗಾಂಜಾ ಮಾರಾಟದಂತಹ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ದೂರುಗಳು ದಾಖಲಾಗಿವೆ.

ಜೊತೆಗೆ ಸಹಚರರೊಂದಿಗೆ ಸೇರಿಕೊಂಡು ಸಾರ್ವಜನಿಕ ಶಾಂತಿಗೆ ಹಾಗೂ ಕಾನೂನು-ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಕಾರ್ಯದಲ್ಲಿ ತೊಡಗಿದ್ದರು. ನ್ಯಾಯಾಲಯದ ಜಾಮೀನು ಷರತ್ತು ನಿಯಮಗಳನ್ನು ಉಲ್ಲಂಘಿಸಿ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು’ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನ ಕೋರಿ, ಪೊಲೀಸ್ ಇಲಾಖೆಯು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆ ಪರಿಶೀಲಿಸಿದ ಡಿಸಿ ಅವರು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶಿಸಿದ್ದರು.

ತದನಂತರ 25-2-2023 ರಂದು ಗೂಂಡಾ ಕಾಯ್ದೆ ಅಧಿನಿಯಮದಡಿ ರಚಿತವಾದ ಸಲಹಾ ಮಂಡಳಿಯು ಈ ಇಬ್ಬರು ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿರುವುದನ್ನು ಪರಿಗಣಿಸಿ ವರದಿ ನೀಡಿತ್ತು. ಅದರಂತೆ 3-3-2023 ರಿಂದ 1 ವರ್ಷದ ಅವಧಿಯವರೆಗೆ ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಆದೇಶಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →