ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆ : ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ – ಸಿಎಂ
ಬೆಳಗಾವಿ (ಸುವರ್ಣಸೌಧ), ಡಿ. 12: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ, ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ, ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದೆ. ಸಮಿತಿ ಸಲ್ಲಿಸುವ ಅಂತಿಮ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ.
ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ : ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದರು.
ವಿರೋಧಪಕ್ಷಗಳ ಆರೋಪ ಸತ್ಯಕ್ಕೆ ದೂರ : ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25 ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ.
ರಾಜ್ಯ ಸರ್ಕಾರ 1ಲಕ್ಷದ 4 ಸಾವಿರ ಕೋಟಿ ರೂಗಳ ಸಾಲವನ್ನು ಮಾಡಲಾಗಿದ್ದು, ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ. ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.
ಎಸ್ ಸಿ ಪಿ/ಟಿಎಸ್ ಪಿ ಅನುದಾನ: ಎಸ್ ಸಿ ಪಿ/ಟಿಎಸ್ ಪಿಗಳಿಗೆ ಬಳಸಲಾಗಿರುವ ಹಣ 2017-18ನೇ ಸಾಲಿನಲ್ಲಿ 36 ಸಾವಿರ ಕೋಟಿ ರೂ.ಖರ್ಚು ಮಾಡಲಾಗಿದೆ. ಈ ವರ್ಷ 39, 272 ಕೋಟಿ ರೂ.ಗಳ ಅನುದಾನ ಇಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್ ಸಿ ಪಿ/ಟಿ ಎಸ್ ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆ ಏಕೆ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ ಸಿಎಂ, ಕೇಂದ್ರ ಸರ್ಕಾರ ಏಕೆ ಈ ಕಾಯ್ದೆ ಮಾಡಿಲ್ಲ ಎಂದು ಮರು ಪ್ರಶ್ನಿಸಿದರು.
The Karnataka Public Service Commission has constituted a 3-member sub-committee to conduct a comprehensive investigation into the protest by the candidates regarding the half-hour delay in the distribution of the question paper during the examination held at Government Pre-Graduate College, Sindhanur for the recruitment of 97 PDO posts of Kalyan Karnataka Division. Chief Minister Siddaramaiah said that the final report submitted by the committee will be reviewed and action will be taken.
